31 Aug 2024
ಚಿತ್ರದುರ್ಗ, ಆ.31 : ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಆಯೋಜಿಸಿರುವ ಅನುಭಾವ ಶ್ರಾವಣ ಸರಣಿ ಚಿಂತನ ಮಾಲೆಯ ಕಾರ್ಯಕ್ರಮವು ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ದೇವಾಲಯದ ಆವರಣದಲ್ಲಿ ಭಾನುವಾರ ಸಂಜೆ 6 ಗಂಟೆಗೆ (ಸೆಪ್ಟೆಂಬರ,1) ಏರ್ಪಡಿಸಲಾಗಿದೆ.
ಬೆಳಗ್ಗೆ 10-30 ಗಂಟೆಯಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಸಂಜೆ ಸಸಿ ನೆಡುವ ಕಾರ್ಯಕ್ರಮ. ಆನಂತರ 6ಗಂಟೆಯಿಂದ ಸಭಾ ಕಾರ್ಯಕ್ರಮವು ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮಿಗಳವರ ಸಾನಿಧ್ಯದಲ್ಲಿ, ಗಂಗಾಪುರ ಸಿದ್ಧಾರೂಢ ಆಶ್ರಮದ ಶ್ರೀಮರುಳಶಂಕರ ಸ್ವಾಮೀಜಿಯವರ ಸಮ್ಮುಖದಲ್ಲಿ ನಡೆಯುವ ಶಿವಾನುಭವ ಗೋಷ್ಠಿಯಲ್ಲಿ ಚಿತ್ರದುರ್ಗದ ಎಸ್ ಜೆ ಎಂ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ನವೀನ್ ಆರ್. ಮಸ್ಕಲ್ ಅವರು ಉಪನ್ಯಾಸ ನೀಡಲಿದ್ದಾರೆ. ಜಮುರಾ ಕಲಾವಿದರಿಂದ ವಚನ ಗಾಯನ ನಡೆಯಲಿದೆ ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.